ಮುಸ್ಲಿಮರ ವಿರುದ್ಧ ವಿವಾದಾತ್ಮಕ ಹೇಳಿಕೆ: ಚಂದ್ರಶೇಖರನಾಥ ಸ್ವಾಮೀಜಿ ಗೆ ನೋಟಿಸ್!
ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ಒಕ್ಕಲಿಗ ಮಠದ ಚಂದ್ರಶೇಖರನಾಥ ಶ್ರೀಗಳ ಹೇಳಿಕೆ ಸದ್ಯ ವಿವಾದ ಸೃಷ್ಟಿಸಿದೆ. ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಇದೀಗ ಡಿ.2ರಂದು ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿದೆ.
ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಬಿಎನ್ಎಸ್ ಸೆಕ್ಷನ್ 299 ರ ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಚಂದ್ರಶೇಖರನಾಥ ಸ್ವಾಮೀಜಿ ವಿವಾದದ ಕಿಡಿ ಹೊತ್ತಿಸಿದ್ದಾರೆ. ವಕ್ಫ್ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ, ಮತದಾನದ ಹಕ್ಕಿಗೆ ಕೈ ಹಾಕಿದ್ದಾರೆ. ಮುಸ್ಲಿಮರಿಗೆ ಮತದಾನದ ಪವರ್ ಇಲ್ಲದಂತೆ ಮಾಡಿಬಿಡಬೇಕು ಅಂತಾ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.
ವಿವಾದ ದೊಡ್ಡದಾಗುತ್ತಿದ್ದಂತೆ ಚಂದ್ರಶೇಖರನಾಥ ಸ್ವಾಮೀಜಿ ಸ್ಪಷ್ಟನೆ ನೀಡಿದ್ದರು. ಅದು ಬಾಯಿ ತಪ್ಪಿ ಆಡಿದ ಮಾತು. ಹಾಗೆ ಹೇಳಬಾರದಾಗಿತ್ತು. ಮುಸ್ಲಿಮರು ಭಾರತೀಯರೇ ಹೊರತು ಬೇರೆ ಯಾರೂ ಅಲ್ಲ. ದಯವಿಟ್ಟು ಈ ವಿಚಾರವನ್ನು ಇಲ್ಲಿಗೇ ಬಿಟ್ಟುಬಿಡಿ ಎಂದು ಸ್ವಾಮೀಜಿ ಮನವಿ ಮಾಡಿದ್ದರು.
ಸಾಮಾಜಿಕ ಕಾರ್ಯಕರ್ತ ಸೈಯ್ಯದ್ ಅಬ್ಬಾಸ್ ಅವರು ನೀಡಿದ ದೂರಿನ ಆಧಾರದ ಮೇಲೆ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಬಿಎನ್ಎಸ್ ಸೆಕ್ಷನ್ 299 ರ ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಚಂದ್ರಶೇಖರನಾಥ ಸ್ವಾಮೀಜಿ ಅವರು ನಮ್ಮ ಸಮುದಾಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಮತದಾನದ ಹಕ್ಕಿಗೆ ಕೈ ಹಾಕಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಸೈಯ್ಯದ್ ಅಬ್ಬಾಸ್ ದೂರು ನೀಡಿದ್ದರು.
ಹಿರಿಯ ಶ್ರೀಗಳ ಬಾಯ್ತಪ್ಪಿದ ಮಾತು ಕ್ರಿಮಿನಲ್ ಅಪರಾಧದಂತೆ ಕಂಡಿರುವುದು ವಿಪರ್ಯಾಸ: ಬಿ.ವೈ. ವಿಜಯೇಂದ್ರ
ಬೆಂಗಳೂರು: ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಕಾಂಗ್ರೆಸ್ ನೀಚ ರಾಜಕಾರಣ ಮಾಡಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಿಡಿಕಾರಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ವಿಜಯೇಂದ್ರ, ತಮ್ಮ ಹೇಳಿಕೆಯ ಕುರಿತಂತೆ ಸೌಹಾರ್ದತೆಯನ್ನು ಪುಷ್ಠೀಕರಿಸಿ ಸೂಕ್ತ ಸ್ಪಷ್ಟನೆ ನೀಡಿ ವಿವಾದಕ್ಕೆ ಇತಿಶ್ರೀ ಹಾಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಈ ಪ್ರಕರಣವನ್ನು ಇಷ್ಟಕ್ಕೇ ಕೈ ಬಿಡಬಹುದಾಗಿದ್ದ ಕಾಂಗ್ರೆಸ್ ಸರ್ಕಾರ ಸ್ವಾಮೀಜಿಗಳ ವಿರುದ್ಧ ದೂರು ದಾಖಲಾಗುವಂತೆ ನೋಡಿಕೊಂಡು ಅವರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆಯುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣ ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ದೇಶದ್ರೋಹಿಗಳು, ಸಮಾಜ ಘಾತುಕ ಶಕ್ತಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಒಬ್ಬ ಸಜ್ಜನಿಕೆಯ ಸಂತರೆಂದು ಕರೆಸಿಕೊಂಡಿರುವ ಹಿರಿಯ ಶ್ರೀಗಳ ಬಾಯ್ತಪ್ಪಿದ ಮಾತು ಕ್ರಿಮಿನಲ್ ಅಪರಾಧದಂತೆ ಕಂಡಿರುವುದು ವಿಪರ್ಯಾಸವೆನಿಸುತ್ತದೆ.
ಪೂಜ್ಯ ಶ್ರೀಗಳು ತಾವು ಆಡಿದ ಮಾತುಗಳ ಕುರಿತು ಸೂಕ್ತ ಸ್ಪಷ್ಟನೆ ನೀಡಿ ಮುಸ್ಲಿಂ ಸಮುದಾಯದೊಂದಿಗಿನ ತಮ್ಮ ಬಾಂಧವ್ಯದ ಕುರಿತು ವಿವರಣೆ ನೀಡಿರುವಾಗ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯ ಹಾಗೂ ಹಗರಣಗಳನ್ನು ಮುಚ್ಚಿಕೊಳ್ಳಲು ಸಣ್ಣ ಸಣ್ಣ ಪ್ರಕರಣಗಳನ್ನೂ ದೊಡ್ಡ ವಿವಾದವನ್ನಾಗಿಸಲು ಹೊರಟು ಜನರ ದಿಕ್ಕು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಲೇ ಇದೆ. ಪರಮ ಪೂಜ್ಯ ಚಂದ್ರಶೇಖರನಾಥ ಶ್ರೀಗಳಿಗೆ ನೋಟೀಸ್ ನೀಡಿ ವಿಚಾರಣೆಗೆ ಕರೆದಿರುವ ಈ ಕ್ರಮವನ್ನು ರಾಜ್ಯ ಬಿಜೆಪಿ ಖಂಡಿಸುತ್ತದೆ ಎಂದು ಹೇಳಿದ್ದಾರೆ.