- ರಾಜ್ಯ
- 8:14 ಫೂರ್ವಾಹ್ನ
- ಜನವರಿ 17, 2023
ಸಾಗರ ಕ್ಷೇತ್ರದ ಮಾಜಿ ಶಾಸಕ ಎಲ್.ಟಿ.ತಿಮ್ಮಪ್ಪ ಹೆಗಡೆ ನಿಧನ

ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಸಾಗರದ ಸಹಕಾರಿ ಧುರೀಣ ಎಲ್.ಟಿ. ತಿಮ್ಮಪ್ಪ ಹೆಗಡೆ[94] ನಿಧನರಾಗಿದ್ದಾರೆ. ಸಾಗರ ತಾಲೂಕಿನ ಲಿಂಗದಹಳ್ಳಿ ಬಳಿಯ ಮಡಸೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಎಲ್.ಟಿ. ತಿಮ್ಮಪ್ಪ ಹೆಗಡೆ ಅವರು ಎರಡೂ ಬಾರಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು.
1978 ಹಾಗೂ 1983ರ ಚುನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು. 1978 ರಲ್ಲಿ ಜನತಾ ಪಕ್ಷದಿಂದ ಸ್ಫರ್ಧಿಸಿದ್ದ ಕಾಗೋಡು ತಿಮ್ಮಪ್ಪ ವಿರುದ್ಧ ಕಾಂಗ್ರೆಸ್ನಿಂದ ಸ್ಫರ್ಧಿಸಿ ತಿಮ್ಮಪ್ಪ ಹೆಗಡೆ ಅವರು ಗೆದ್ದು ಬೀಗಿದ್ದರು. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದ ತಿಮ್ಮಪ್ಪ ಅವರ ಸ್ವಗ್ರಾಮದಲ್ಲಿ ಇಂದು ಅಂತ್ಯಕ್ರಿಯೆ ನೆರವೇರಲಿದೆ.
ಇವರು ಸಾಗರ ಪ್ರಾಂತ್ಯದಲ್ಲಿ ಅಡಿಕೆ ಬೆಳೆಗಾರರ ಸಂಘ ಸ್ಥಾಪನೆ, ಅಂತರರಾಜ್ಯ ಸಂಸ್ಥೆ ಕ್ಯಾಂಪ್ಕೋ, ಸಾಗರದ ಆಪ್ಸ್ಕೋಸ್ನಂತಹ ಸಂಸ್ಥೆಗಳನ್ನು ಹುಟ್ಟು ಹಾಕುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದರು. ಸಾಗರದ ಆಪ್ಸ್ಕೋಸ್, ತೋಟಗಾರ್ಸ್, ಅಡಿಕೆ ಬೆಳೆಗಾರರ ಸಂಘಗಳ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಎಲ್.ಟಿ.ತಿಮ್ಮಪ್ಪ ಹೆಗಡೆ ಅವರು ಕ್ಯಾಂಪ್ಕೋ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಇನ್ನು ಎಲ್.ಟಿ.ತಿಮ್ಮಪ್ಪ ಹೆಗಡೆ ಅವರು ತಮ್ಮ ಸಹೋದರ ಗಣಪತಿ ಹೆಗಡೆ, ಪತ್ನಿ ಸಾವಿತ್ರಮ್ಮ, ಪುತ್ರರಾದ ತಿಮ್ಮಪ್ಪ ಹಾಗೂ ಅಶೋಕ, ಸೊಸೆ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಾಂಧವರನ್ನು ಅಗಲಿದ್ದಾರೆ.