ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಟ ಉಷ್ಣಾಂಶ ಮತ್ತು ಬಿಸಿ ಗಾಳಿ ಸಾಧ್ಯತೆ ; ದೇಶದಲ್ಲಿ ಹಲವೆಡೆ ಮಳೆಯಾಗುವ ಲಕ್ಷಣ!
ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಭಾಗಗಳಲ್ಲಿ ಉಷ್ಣಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 5.1ಡಿಗ್ರಿ ಸೆಲ್ಸಿಯಸ್ಗಿಂತಲೂ ಹೆಚ್ಚಾಗಲಿದೆ. ಪಣಂಬೂರಿನಲ್ಲಿ 38.8 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬಾಗಲಕೋಟೆಯಲ್ಲಿ 13.4 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ. ಕೆಐಎಎಲ್ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ. 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ಇಂದಿನಿಂದ ಮಾರ್ಚ್ 9-12ರವರೆಗೆ ದೇಶದ ವಿವಿಧೆಡೆ ಗುಡುಗು ಸಹಿತ ಮಳೆ ಬೀಳಲಿದೆ.
ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ ರಾಜ್ಯಗಳಲ್ಲಿ ಲಘು ಮಳೆ ಇಲ್ಲವೇ ಗುಡುಗು ಸಹಿತ ಹಗುರ ಮಳೆಯಾಗುವ ಲಕ್ಷಣಗಳು ಇವೆ. ಈ ವೇಳೆ ಎಲ್ಲೆಡೆ ಮೋಡ ಕವಿದ ವಾತಾವರಣ ಸೃಷ್ಟಿಯಾಗಲಿದೆ.
ದೆಹಲಿಯಲ್ಲಿ ಶುಕ್ರವಾರ ಮಾರ್ಚ್ 10ರಂದು ಕೂಡ ಕೆಲವು ಕಡೆಗಳಲ್ಲಿ ಹಗುರು ಮಳೆಯಾಗುವ ನಿರೀಕ್ಷೆ ಇದೆ. ಅಷ್ಟೇ ಅಲ್ಲದೇ ಹಿಮಾಚಲ ಪ್ರದೇಶ, ಉತ್ತರಾಖಂಡ, ದಕ್ಷಿಣ ಹರ್ಯಾಣ, ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ ಸೇರಿದಂತೆ ಕೆಲವು ರಾಜ್ಯಗಳ ಒಂದೆರಡು ಕಡೆಗಳಲ್ಲಿ ಶುಕ್ರವಾರದವರೆಗೆ ಅಲ್ಲಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.