ಜಯನಗರ ಕ್ಷೇತ್ರದಲ್ಲಿ ತಡರಾತ್ರಿವರೆಗೂ ಮತ ಎಣಿಕೆ; ಗೆದ್ದು ಸೋತ ಸೌಮ್ಯ ರೆಡ್ಡಿ! 16 ಮತಗಳಿಂದ ಬಿಜೆಪಿಗೆ ಗೆಲುವು

ಬೆಂಗಳೂರು : ಜಯನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಗೊಂದಲಕ್ಕೆ ಚುನಾವಣಾಧಿಕಾರಿಗಳು ಶನಿವಾರ ಮಧ್ಯರಾತ್ರಿ ತೆರೆ ಎಳೆದಿದ್ದು, ಬಿಜೆಪಿಯ ಸಿ.ಕೆ.ರಾಮಮೂರ್ತಿ ಅವರು ಗೆದ್ದಿದ್ದಾರೆಂದು ಘೋಷಣೆ ಮಾಡಿದರು. ಇದರಿಂದ ಬೇಸರಗೊಂಡ ಕಾಂಗ್ರೆಸ್ನ ಸೌಮ್ಯ ರೆಡ್ಡಿ ಕಣ್ಣೀರು ಹಾಕಿದರು.
ಮತ ಎಣಿಕೆ ಗೊಂದಲದ ಹಿನ್ನೆಲೆಯಲ್ಲಿಎಸ್ಎಸ್ಎಂಆರ್ವಿ ಕಾಲೇಜಿನ ಮತ ಎಣಿಕೆ ಕೇಂದ್ರದ ಬಳಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಎಸ್ಎಸ್ಎಂಆರ್ವಿ ಕಾಲೇಜಿನ ಮತ ಎಣಿಕೆ ಕೇಂದ್ರ ಬಳಿ ಜಮಾಯಿಸಿ, ಪರಸ್ಪರ ಘೋಷಣೆ ಕೂಗಿ ಪ್ರತಿಭಟಿಸಿದರು.
ನಿರಂತರ ಹಾವು ಏಣಿ ಆಟ
ಜಯನಗರ ಕ್ಷೇತ್ರದ ಮತ ಎಣಿಕೆಯು ಮೊದಲ ಸುತ್ತಿನಿಂದಲೂ ಹಾವು-ಏಣಿಯಾಟ ನಡೆಯುತ್ತಲೇ ಇತ್ತು. 16 ಸುತ್ತಿನ ಮತ ಎಣಿಕೆ ಕಾರ್ಯ ಮುಗಿದ ಬಳಿಕ ಕಾಂಗ್ರೆಸ್ನ ಸೌಮ್ಯಾರೆಡ್ಡಿ ಅವರು 294 ಮತಗಳಿಂದ ಮುನ್ನಡೆ ಸಾಧಿಸಿರುವುದನ್ನು ಚುನಾವಣಾ ಫಲಿತಾಂಶದ ವೆಬ್ಸೈಟ್ನಲ್ಲಿ ಪ್ರಕಟಿಸಲಾಯಿತು. ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ಅವರು ಅಂಚೆ ಮತಗಳ ಮರು ಎಣಿಕೆಗೆ ಒತ್ತಾಯಿಸಿದರು. ಒಟ್ಟು ಮೂರು ಬಾರಿ ಮರು ಎಣಿಕೆ ಮಾಡಲಾಯಿತು.
ಮೊದಲ ಸಲ ಮತ್ತು ಎರಡನೇ ಬಾರಿಯ ಮರು ಎಣಿಕೆಯಲ್ಲಿಸೌಮ್ಯಾರೆಡ್ಡಿ ಅವರೇ ಮುಂದಿದ್ದರು. ಅಂತಿಮ ಮರು ಎಣಿಕೆಯಲ್ಲಿ ಮೊದಲಿಗೆ ತಿರಸ್ಕೃತಗೊಳಿಸಿದ್ದ 200 ಅಂಚೆ ಮತಗಳನ್ನು ಸಿಂಧುಗೊಳಿಸಿದ್ದರಿಂದ ಬಿಬಿಎಂಪಿ ಮಾಜಿ ಕಾರ್ಪೋರೇಟರ್, ಬಿಜೆಪಿಯ ಸಿ.ಕೆ.ರಾಮಮೂರ್ತಿ 16 ಮತಗಳ ಮುನ್ನಡೆ ಸಾಧಿಸಿದರು. ಇದಕ್ಕೆ ಕಾಂಗ್ರೆಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿಚುನಾವಣಾಧಿಕಾರಿಗಳು ಫಲಿತಾಂಶ ಪ್ರಕಟಿಸಿರಲಿಲ್ಲ.