ಪೆನ್ ಡ್ರೈವ್ ಪ್ರಕರಣದ ಕುರಿತು ಹೆಚ್ ಡಿ ರೇವಣ್ಣ ಮೊದಲ ಪ್ರತಿಕ್ರಿಯೆ ಏನು?
![ಪೆನ್ ಡ್ರೈವ್ ಪ್ರಕರಣದ ಕುರಿತು ಹೆಚ್ ಡಿ ರೇವಣ್ಣ ಮೊದಲ ಪ್ರತಿಕ್ರಿಯೆ ಏನು?](https://urtv24.com/wp-content/uploads/2024/05/h.d.revanna-1.webp)
ಮಾಜಿ ಸಚಿವ ಹೆಚ್ಡಿ ರೇವಣ್ಣ (HD Revanna) ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ (Pen Drive) ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದೆ. ತಮ್ಮ ಮಗನ ವಿರುದ್ಧ ಕೇಳಿಬಂದಿರುವ ಆರೋಪಗಳ ಬಗ್ಗೆ ತಂದೆ, ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ವಿಚಾರ ಏನು ಗೊತ್ತಿಲ್ಲ. ನಾನು ಯಾರ ಬಗ್ಗೆ ಮಾತನಾಡಲ್ಲ ನನಗೇನೂ ಗೊತ್ತಿಲ್ಲ. ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ವಿದೇಶದಿಂದ ಬರುವ ವಿಚಾರವಾಗಿ ಹೊಳೆನರಸೀಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಅವರು, ನಾನು ಯಾರ ಬಗ್ಗೆಯೂ ಮಾತನಾಡಲ್ಲ. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಪ್ರಜ್ವಲ್ ರೇವಣ್ಣ ವಿಚಾರ ಏನು ಗೊತ್ತಿಲ್ಲ ಎಂದರು.
ಹಾಸನ ಜಿಲ್ಲೆಯ ನಮಗೆ ಶಕ್ತಿ ಕೊಟ್ಟಿದ್ದಾರೆ. 25 ವರ್ಷ ನಾನು ಶಾಸಕನಾಗಿ ಇಲ್ಲಿ ಕೆಲಸ ಮಾಡಿದ್ದೇನೆ. ಯಾರೂ ಧೃತಿಗೆಡುವುದು ಬೇಡ. ಇಂದು (ಮೇ 22) ಜಿಲ್ಲೆಯ ನಾಲ್ಕು ಶಾಸಕರ ಜೊತೆ ಜೊತೆ ಚರ್ಚಿಸುತ್ತೇನೆ. ಪ್ರಕರಣ ಕೋರ್ಟ್ನಲ್ಲಿರುವುದರಿಂದ ಏನೂ ಹೇಳಲ್ಲ. ನನಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ನಾನು ಅದರ ಬಗ್ಗೆ ಏನೂ ಮಾತನಾಡಲ್ಲ ಎಂದು ಹೇಳಿದರು. ಈ ವೇಳೆ ಬೆಂಬಲಿಗರು ಜೈಕಾರ ಹಾಕುತ್ತಿದ್ದಂತೆ ಹೆಚ್ಡಿ ರೇವಣ್ಣ ಅವರು ಭಾವುಕರಾದರು.
ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರು ಅಪಹರಣ ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ದಿನದಿಂದ ಇಂದಿನವರೆಗೂ ಹಾಸನ, ಬೆಂಗಳೂರು ಮತ್ತು ಮೈಸೂರು ಜಿಲ್ಲೆಗಳ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು (ಮೇ 22) ಸಹ ಹೊಳೆನರಸೀಪುರದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದರು. ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಕುಟುಂಬಸ್ಥರ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ಬಳಿಕ ಹೆಚ್ಡಿ ರೇವಣ್ಣ ಹೊಳೆನರಸೀಪುರದ ಲಕ್ಷ್ಮೀನರಸಿಂಹ ದೇಗುಲಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು.