ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲು ; ಏನಿದು ಪ್ರಕರಣ!
ಮೈಸೂರು, (ಡಿಸೆಂಬರ್ 27): ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ (Pratap Simha) ವಿರುದ್ಧ ಕೊನೆಗೂ ಎಫ್ಐಆರ್ ದಾಖಲಾಗಿದೆ. ಮೈಸೂರಿನ (Mysuru) ದೇವರಾಜ ಪೊಲೀಸ್ ಠಾಣೆಯಲ್ಲಿ 1860ರ IPC ಸೆಕ್ಷನ್ 504 , 153ರ ಅಡಿಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸೋಮಾರಿ ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇನಕಾರಿ ಹೇಳಿಕೆ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರು ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.
ಅಲ್ಲದೇ ಸಿಎಂ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ದ್ವೇಷ ಹರಡುತ್ತಿದ್ದಾರೆಂದು ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು, ನಿನ್ನೆ(ಡಿಸೆಂಬರ್ 27) ರಾತ್ರಿ ಪ್ರತಾಪ್ ಸಿಂಹ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಕೊನೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಳ್ಳುವುದಾಗಿ ಭರವಸೆ ನೀಡಿದ್ದರಿಂದ ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದರು.
ಪ್ರತಾಪ್ ಸಿಂಹರಿಂದ ಹಿಂದು ಮತ್ತು ಮುಸ್ಲಿಂ ನಡುವೆ ಕೋಮು ಗಲಭೆ ಸೃಷ್ಟಿಸಲು ನಿರಂತರ ಪ್ರಯತ್ನ ಎಂದು ಮೈಸೂರು ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ ವಿಜಯಕುಮಾರ್ ಲಿಖಿತ ದೂರು ನೀಡಿದ್ದರು. ಅದಂತೆ ಇದೀಗ ದೇವರಾಜ್ ಪೊಲೀಸ್ ಠಾಣೆಯಲ್ಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹುಣಸೂರಿನಲ್ಲಿ ಮಂಗಳವಾರ ನಡೆದ ಹನುಮ ಜಯಂತಿಯಲ್ಲಿ ಭಾಗವಹಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ಕಾರ್ಯಕರ್ತನಿಂದ ಹಿಡಿದು ಸಿಎಂ ಪುತ್ರನವರೆಗೂ ಎಲ್ಲರೂ ನನ್ನ ಟಾರ್ಗೆಟ್ ಮಾಡಿದ್ದಾರೆ. ನನ್ನ ಭಯೋತ್ಪಾದಕ ಅಂತ ಬಿಂಬಿಸುವ ಪ್ರಯತ್ನ ಕಾಂಗ್ರೆಸಿಗರು ಮಾಡಿದರು. ಮುಸ್ಲಿಮರೆಲ್ಲಾ ಭಯೋತ್ಪಾದಕರು ಅನ್ನೋ ರೀತಿ ನನಗೆ ಮುಸ್ಲಿಂ ವೇಷ ತೊಡಿಸಿ ಕೈಯಲ್ಲಿ ಬಾಂಬ್ ಕೊಟ್ಟಿದ್ದರು. ಸಂಸತ್ ವಿಚಾರದಲ್ಲಿ ನಾನು ಸ್ಪಷ್ಟನೆ ಕೊಟ್ಟ ಬೆನ್ನಲ್ಲೆ ಪ್ರತಾಪ್ ಸಿಂಹ ಸಹೋದರ ಮರಗಳ್ಳ ಅಂತಾ ಕಾಂಗ್ರೆಸ್ ನವರು ಪೋಸ್ಟ್ ಮಾಡಿದ್ದರು ಎಂದು ಟೀಕಿಸಿದ್ದಾರೆ.
ಅಸಮಾಧಾನದ ನಡುವೆಯೇ ಬಿವೈ ವಿಜಯೇಂದ್ರ ನೇತೃತ್ವದಲ್ಲಿಂದು ಬಿಜೆಪಿ ಪದಾಧಿಕಾರಿಗಳ ಮೊದಲ ಸಭೆ
ಬೆಂಗಳೂರು(ಡಿಸೆಂಬರ್.27): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra) ಅವರ ನೇತೃತ್ವದಲ್ಲಿ ಇಂದು(ಡಿಸೆಂಬರ್ 27) ಮೊದಲ ರಾಜ್ಯ ಪದಾಧಿಕಾರಿಗಳ ತಂಡದ ಸಭೆ ನಡೆಯಲಿದೆ. ಪಕ್ಷ ಸಂಘಟನೆ, ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಸಂಬಂಧ ಈ ಸಭೆಯಲ್ಲಿ ಚರ್ಚೆಯಾಗಲಿದೆ. ಮೊದಲ ಹಂತವಾಗಿ ಬುಧವಾರ ಬೆಳಿಗ್ಗೆ 10 ಗಂಟೆಗೆ ಪದಾಧಿಕಾರಿಗಳ ಸಭೆ ನಡೆದರೆ, ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಮಟ್ಟದ ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡುವ ಸಭೆ ನಡೆಯಲಿದೆ.
ಇಂದಿನ ಪದಾಧಿಕಾರಿಗಳ ಸಭೆ ನಂತರ ವಿಜಯೇಂದ್ರ ಅವರು ನಾಳೆ (ಡಿಸೆಂಬರ್ 27) ರಾಜ್ಯ ಬಿಜೆಪಿಯ ಪ್ರಮುಖರ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ರಾಜ್ಯದ ಮಾಜಿ ಸಚಿವರು, ಪ್ರಮುಖರು ಭಾಗವಹಿಸುತ್ತಾರೆ. ಅವರ ಅಭಿಪ್ರಾಯ ಪಡೆದು ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ, ಪಕ್ಷದ ಸಂಘಟನೆ ಹಾಗೂ ಲೋಕಸಭಾ ಚುನಾವಣೆ ಎದುರಿಸುವುದರ ಕುರಿತು ಎಲ್ಲರ ಸಲಹೆ ಪಡೆಯಲಿದ್ದಾರೆ. ಅಂತೆಯೇ ಈ ಸಭೆಯಲ್ಲಿ ರಾಜ್ಯದಲ್ಲಿ ತಳಮಟ್ಟಕ್ಕೆ ಸಂಘಟನೆ, ಹೋರಾಟ ಮತ್ತು ಪ್ರತಿಭಟನೆಯ ರೂಪುರೇಷೆ ಬಗ್ಗೆ ಚರ್ಚೆಗಳು ನಡೆಯಲಿವೆ ಎಂದು ತಿಳಿದುಬಂದಿದೆ.
ಮೊನ್ನೇ ಅಷ್ಟೇ ನವದೆಹಲಿಯಲ್ಲಿ ನಡೆದಿದ್ದ ರಾಜ್ಯದ ಎಲ್ಲಾ ರಾಜ್ಯಾಧ್ಯಕ್ಷ ಸಭೆಯಲ್ಲಿ ಲೋಕಸಭಾ ಚುನಾವಣೆಗೆ ಸಿದ್ಧರಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದರು. ಅದರಂತೆ ಇದೀಗ ರಾಜ್ಯದಲ್ಲಿ ವಿಜಯೇಂದ್ರ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಭರವಸೆ ಮೇರೆಗೆ ಹೈಕಮಾಂಡ್ ಹಲವರು ವಿರೋಧದ ನಡುವೆಯೂ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಿದ್ದು, ಅದನ್ನು ಉಳಿಸಿಕೊಳ್ಳಲು ವಿಜಯೇಂದ್ರ ಕಸರತ್ತು ನಡೆಸಿದ್ದಾರೆ. ಹೀಗಾಗಿ ಉಪಾಧ್ಯಕ್ಷ, ಕಾರ್ಯದರ್ಶಿಗಳು ಸೇರಿದಂತೆ ವಿವಿಧ ಮೋರ್ಚಗಳಿಗೆ ಅಧ್ಯಕ್ಷರನ್ನ ನೇಮಕ ಮಾಡಿದ್ದರು.
ಬಸನಗೌಡ ಪಾಟೀಲ್ ಯತ್ನಾಳ್, ವಿ ಸೋಮಣ್ಣ ಸೇರಿದಂತೆ ಇತರೆ ನಾಯಕರ ಅಸಮಾಧಾನದ ನಡುವೆಯೂ ಈ ಸಭೆ ನಡೆಯುತ್ತಿದ್ದು, ಏನೆಲ್ಲಾ ಬದಲಾವಣೆಗಳು ಆಗಲಿವೆ ಎನ್ನುವುದು ಕಾದುನೋಡಬೇಕಿದೆ.