- ಬೆಳ್ತಂಗಡಿ
- 8:36 ಫೂರ್ವಾಹ್ನ
- ಮಾರ್ಚ್ 9, 2023
ಮಹಿಳೆ ಜಾಗೃತವಾದಲ್ಲಿ ಸಶಕ್ತೀಕರಣಕ್ಕೆ ಅರ್ಥ: ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ಮಹಿಳಾ ಸಶಕ್ತೀಕರಣ ಅಂದರೆ ಮಹಿಳೆಯರಲ್ಲಿರುವ ಶಕ್ತಿ-ಸಾಮರ್ಥ್ಯ ಮತ್ತು ಕೌಶಲದೆಡೆಗೆ ಅವರಿಗೆ ಅರಿವು, ಜಾಗೃತಿ ಮೂಡಿಸಿ ಸಮಾಜದ ಮುಖ್ಯವಾಹಿನಿಗೆ ತರುವುದಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರ ಸಶಕ್ತೀಕರಣಕ್ಕೆ ಶ್ರೇಷ್ಠ ಅವಕಾಶ, ಪ್ರೇರಣೆ ಮತ್ತು ನಿರಂತರ ಮಾರ್ಗದರ್ಶನ ನೀಡುತ್ತಿದೆ ಎಂದು ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಉದ್ದಿಮೆದಾರರ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿ, ಇಂದು ಸರಕಾರ ಮತ್ತು ಸಮಾಜದಿಂದ ಸಿಗುವ ಅವಕಾಶಗಳು, ಶಿಕ್ಷಣ ಹಾಗೂ ಸಾಲ ಸೌಲಭ್ಯದ ಸದುಪಯೋಗ ಪಡೆದು ಮಹಿಳೆಯರು ಸ್ವಾವಲಂಬಿಗಳಾಗಿ ಉತ್ತಮ ವ್ಯವಹಾರದೊಂದಿಗೆ ಯಶಸ್ವಿ ಉದ್ಯಮಿಗಳಾಗಿ ಮಿಂಚುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅಮೃತ ಜೀವನ ಪ್ರಯಾಸ್ ಚಿಂತನ ಕೃತಿ ಬಿಡುಗಡೆಗೊಳಿಸಿದ ಸಿಡ್ಬಿ ಅಧ್ಯಕ್ಷ ಶಿವ ಸುಬ್ರಹಮಣ್ಯ ರಾಮನ್ ಮಾತನಾಡಿ, ಸಿಡ್ಬಿಯ ಪ್ರಯಾಸ್ಯೋಜನೆಯಡಿ ಉದ್ದಿಮೆ ಆಸಕ್ತರಿಗೆ ಕಡಿಮೆ ಬಡ್ಡಿದರದಲ್ಲಿ ಉತ್ತಮ ಸಾಲ ಒದಗಿಸುತ್ತಿದೆ. ಮಹಿಳಾ ಉದ್ದಿಮೆದಾರರು ಉದ್ಯಮ ನೋಂದಾವಣೆ ಮಾಡಿಕೊಂಡು ಸರಕಾರಕ್ಕೆ ನೀಡುವ ತೆರಿಗೆಯನ್ನು ಸಕಾಲದಲ್ಲಿ ಪಾವತಿಸಬೇಕು. ಎಲ್ಲರೂ ಸ್ವಾವಲಂಬನೆಯೊಂದಿಗೆ ಜೀವನ ಮಟ್ಟ ಸುಧಾರಣೆ ಕಂಡುಕೊಳ್ಳಬೇಕು ಎಂದರು.
ಮಂಗಳೂರಿನ ಅನಂತ ಭಟ್, ಡ್ಯಾಫಿನಿ ಸ್ಟೆಲ್ಲಾ ಡಿ’ಸೋಜಾ, ಸಿರಿ ಸಂಸ್ಥೆಯ ಪ್ರಸನ್ನ ಯು. ತೆರಿಗೆ ಪಾವತಿ ಮತ್ತು ಲೆಕ್ಕಪತ್ರ ನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಡಾ| ಹೇಮಾವತಿ ವೀ.ಹೆಗ್ಗಡೆ, ಸಿಡ್ಬಿಯ ಮುಖ್ಯ ಮಹಾಪ್ರಬಂಧಕ ರವಿತ್ಯಾಗಿ ಮತ್ತು ಉಪಮಹಾಪ್ರಬಂಧಕ ನಿತಿನ್ ಶುಕ್ಲಾ ಉಪಸ್ಥಿತರಿದ್ದರು.