ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಇಂದು ಕಾಂಗ್ರೆಸ್ ಸೇರ್ಪಡೆ.!

ಕಾರವಾರ: ಬಿಜೆಪಿಯಿಂದ ಆಯ್ಕೆಯಾಗಿದ್ದರೂ ಆ ಪಕ್ಷದಿಂದ ಅಂತರ ಕಾಪಾಡಿಕೊಂಡು ಕಾಂಗ್ರೆಸ್ ಜತೆ ನಿಕಟ ಸಂಪರ್ಕ ಹೊಂದಿರುವ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ (Shivaram Hebbar) ಅವರು ತಮ್ಮ ನಿಲುವನ್ನು ಇನ್ನೂ ಸ್ಪಷ್ಟಪಡಿಸಿಲ್ಲ. ಆದರೆ, ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಅವರ ಪುತ್ರ ವಿವೇಕ್ ಹೆಬ್ಬಾರ್ ಗುರುವಾರ (ಏಪ್ರಿಲ್11ರಂದು) ಕಾಂಗ್ರೆಸ್ ಪಕ್ಷಕ್ಕೆ (Congress Party) ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ. ಬನವಾಸಿಯಲ್ಲಿ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.
ಶಿರಸಿ ತಾಲೂಕಿನ ಬನವಾಸಿಯಲ್ಲಿ ಗುರುವಾರ ವಿವೇಕ್ ಹೆಬ್ಬಾರ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ಆಯೋಜನೆಗೊಂಸಿದೆ. ಸಚಿವ ಮಂಕಾಳು ವೈದ್ಯ ಸಮ್ಮುಖದಲ್ಲಿ ವಿವೇಕ್ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ. ಇದೇ ವೇಳೆ ಅವರು ನೂರಾರು ಬೆಂಬಲಿಗರನ್ನು ಕಾಂಗ್ರೆಸ್ಗೆ ಸೇರ್ಪಡೆಗೊಳಿಸಲಿದ್ದಾರೆ. ಲೋಕ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅವರ ಕಾಂಗ್ರೆಸ್ ಸೇರ್ಪಡೆ ತಾಲೂಕಿನಲ್ಲಿ ಚರ್ಚೆಯ ವಿಷಯವಾಗಿದೆ.
ಗುರವಾರ ಬನವಾಸಿಯಲ್ಲಿ ನಡೆಯುವ ಕಾರ್ಯಕ್ರಮ ಮುಗಿಸಿ ಬೆಂಗಳೂರಿನಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಪುತ್ರನ ಸೇರ್ಪಡೆ ಮೂಲಕ ಹೆಬ್ಬಾರ್ ಅವರ ಪಕ್ಷಾಂತರ ಬಹುತೇಕ ನಿಶ್ಚಿತ ಎನ್ನಲಾಗುತ್ತಿದೆ.
ಚುನಾವಣಾ ಪ್ರಚಾರಕ್ಕೆ ಬರದ ಹೆಬ್ಬಾರ್
ಕಳೆದ ಕೆಲವು ತಿಂಗಳಿಂದ ಬಿಜೆಪಿಯ ಸಖ್ಯವನ್ನು ತೊರೆದಿರುವ ಹೆಬ್ಬಾರ್ ಅವರು ಕಾಂಗ್ರೆಸ್ ಪಾಳಯದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಅಧಿಕೃತವಾಗಿ ಕೈ ಪಕ್ಷವನ್ನು ಸೇರಿಲ್ಲವಾದರೂ ಅಲ್ಲಿನ ಗಣ್ಯರೊಂದಿಗೆ ಹೆಚ್ಚು ಒಡನಾಟ ಹೊಂದಿದ್ದಾರೆ. ಪೂರಕವಾಗಿ ಅವರು ಲೋಕ ಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಭಾಗಿಯಾಗುತ್ತಿಲ್ಲ. ಬಿಜೆಪಿಯಿಂದ ಸಂಪೂರ್ಣವಾಗಿ ಅಂತರ ಕಾಯ್ದುಕೊಂಡಿರುವ ಅವರು ರಾಜಕೀಯ ಚಟುವಟಿಕೆಗಳಿಂದ ದೂರವಿದ್ದಾರೆ.