ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪ್ರಮೋದ್ ಮಧ್ವರಾಜ್ ನೇಮಕ.!
ಉಡುಪಿ : ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಅವರನ್ನು ನೇಮಕ ಮಾಡಲಾಗಿದೆ.
ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಪ್ರಮೋದ್ ಮಧ್ವರಾಜ್ಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಈ ಘೋಷಣೆ ಮಾಡಲಾಗಿದೆ.ಕ್ಷೇತ್ರದ ಚುನಾವಣಾ ಉಸ್ತುವಾರಿ ಆರಗ ಜ್ಞಾನೇಂದ್ರ ಅವರು ನೇಮಕ ಮಾಡಿದ್ದಾರೆ.
ಉಡುಪಿಯ ಅಮ್ಮುಂಜೆಯ ಅವರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಬಿಜೆಪಿ ತ್ಯಜಿಸುತ್ತೇನೆ ಎಂದು ಕೆಲವೊಂದಿಷ್ಟು ಜನ ಮಾತಾಡುತ್ತಿದ್ದಾರೆ. ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಮುಂದೊಂದು ದಿನ ರಾಜಕೀಯ ನಿವೃತ್ತಿಯಾಗುತ್ತೇನೆಯೇ ಹೊರತು, ದೇಹಾಂತ್ಯ ಆಗುವವರೆಗೆ ನಾನು ಬಿಜೆಪಿ ಬಿಡುವುದಿಲ್ಲ. ನಾನು ಕಮಲ ಕಾರ್ಯಕರ್ತನಾಗಿಯೇ ಉಳಿಯುತ್ತೇನೆ ಎಂದರು.
ಶೋಭಾ ಕರಂದ್ಲಾಜೆ ಪ್ರತಿನಿಧಿಸುತ್ತಿರುವ ಕ್ಷೇತ್ರ!
ಸದ್ಯ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಕೆ ಪ್ರತಿನಿಧಿಸುತ್ತಿದ್ದಾರೆ. ಶೋಭಾ ಕರಂದ್ಲಾಜೆ ಅವರು ಈ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ವಲಸೆ ಹೋಗುವ ಸಾಧ್ಯತೆ ಇದೆ. ಈ ಕ್ಷೇತ್ರಕ್ಕೆ ಚಿಕ್ಕಮಗಳೂರಿನ ಮಾಜಿ ಶಾಸಕ ಸಿಟಿ ರವಿ ಹೆಸರು ಕೂಡ ಪ್ರಬಲವಾಗಿ ಕೇಳಿಬರುತ್ತಿದೆ. ಇದರ ನಡುವೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕೂಡ ಟಿಕೆಟ್ ಆಕಾಂಕ್ಷಿಯಾಗಿರುವುದು ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎಂಬುದು ಕುತೂಹಲ ಮೂಡಿಸಿದೆ.
'ಅಭಿವೃದ್ಧಿ ವಿಚಾರದಲ್ಲಿ ನಮ್ಮ ಕ್ಷೇತ್ರ ನಂಬರ್ ಒನ್ ಸ್ಥಾನಲ್ಲಿದೆ' - ಸಂಸದ ಬಿ ವೈ ರಾಘವೇಂದ್ರ
ಬೈಂದೂರು: ನನ್ನ ಅವಧಿಯಲ್ಲಿ ಬೈಂದೂರು ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯನ್ನು ಮಾಡಿದ್ದೇವೆ ರಾಜ್ಯದಲ್ಲಿ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಕ್ಷೇತ್ರ ನಂಬರ್ ಒನ್ ಸ್ಥಾನದಲ್ಲಿದೆ ಈ ಬಗ್ಗೆ ಶ್ವೇತಪತ್ರ ಹೊರಡಿಸಲು ನಾನು ಸಿದ್ಧ ಎಂದು ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಹೇಳಿದ್ದಾರೆ. ಬೈಂದೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾನು ಏನು ಮಾಡಿದ್ದೇನೆ ಎನ್ನುವ ಬಗ್ಗೆ ಪ್ರಶ್ನೆ ಮಾಡುವ ಕಾಂಗ್ರೆಸ್ನವರು ಸ್ವಾತಂತ್ರ್ಯದ ನಂತರ 70 ವರ್ಷಗಳಲ್ಲಿ ಬೈಂದೂರನ್ನು ಎಷ್ಟು ಅಭಿವೃದ್ಧಿಪಡಿಸಿದ್ದಾರೆ ತೋರಿಸಲಿ ಎಂದು ಹೇಳಿದರು.
ಕುಡಿಯುವ ನೀರಿನ ಯೋಜನೆ, ಏತ ನೀರಾವರಿ ಯೋಜನೆ ಸೇರಿದಂತೆ ಬೈಂದೂರು ಮತ್ತು ಶಿವಮೊಗ್ಗವನ್ನು ಸಂಪರ್ಕಿಸುವ ಹೆದ್ದಾರಿ ಅಭಿವೃದ್ಧಿ ಯೋಜನೆ ತನಲ್ ನಿರ್ಮಾಣ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ರೈತರಿಗೆ ವಿವಿಧ ಯೋಜನೆಗಳು ಸೇರಿದಂತೆ ನೂರಾರು ಕೆಲಸಗಳನ್ನ ನನ್ನ ಅವಧಿಯಲ್ಲಿ ಮಾಡಲಾಗಿದೆ ಈ ಬಗ್ಗೆ ನೂರಾರು ಪುಟಗಳ ಸಾಧನೆಯ ಪಟ್ಟಿಯನ್ನು ಜನರ ಮುಂದಿಡಲು ನಾವು ಸಿದ್ಧರಿದ್ದೇವೆ ಎಂದರು.
ಈಶ್ವರಪ್ಪ ಬಗ್ಗೆ ಪ್ರತಿಕ್ರಿಯಿಸಿದ ಸಂಸದ ಬಿ ವೈ ರಾಘವೇಂದ್ರ, ಈಶ್ವರಪ್ಪ ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರು. ಅವರು ಈಗಾಗಲೇ ಹೇಳಿದಂತೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎನ್ನುವುದು ನಮ್ಮ ಕನಸು ಕೂಡ ಆ ನಿಟ್ಟಿನಲ್ಲಿ ನಾವು ಕಾರ್ಯಕರ್ತರ ಜೊತೆ ಕೆಲಸ ಮಾಡುತ್ತಿದ್ದೇವೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆಯಾದರೆ ಮೋದಿಯವರ ಕೈ ಬಲಪಡಿಸಿದಂತಾಗುತ್ತದೆ. ಈಶ್ವರಪ್ಪ ಜೊತೆ ಪಕ್ಷದ ನಾಯಕರು ಮಾತುಕತೆ ನಡೆಸಿ ಅವರ ಮನವೊಲಿಸುವಲ್ಲಿ ಯಶಸ್ಸು ಕಾಣುತ್ತಾರೆ ಆದುದರಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನನ್ನ ಗೆಲುವಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದರು.
ಬಿಜೆಪಿ ಕಾರ್ಯಕರ್ತರ ಪಕ್ಷ ಕಾರ್ಯಕರ್ತರ ನಂಬಿಕೆ ಉಳಿಸಿಕೊಳ್ಳುವ ಕೆಲಸವನ್ನು ನಾನು ಪ್ರಾಮಾಣಿಕವಾಗಿ ಮಾಡುತ್ತೇನೆ. ದೇಶದಲ್ಲಿ ನಡೆಯುವ ಲೋಕಸಭಾ ಚುನಾವಣೆ ರಾಷ್ಟ್ರೀಯತೆ ಮತ್ತು ರಾಷ್ಟ್ರ ವಿರೋಧಿಗಳ ನಡುವಿನ ಚುನಾವಣೆ. ಮತದಾರರು ಬುದ್ಧಿವಂತರಾಗಿದ್ದಾರೆ. ರಾಷ್ಟ್ರೀಯತೆ ಮತ್ತು ರಾಷ್ಟ್ರ ರಕ್ಷಣೆಯ ಜೊತೆಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುತ್ತಾರೆ ಎಂದರು.
ಕಾಂಗ್ರೆಸ್ಸಿನ ಕೆಲವು ನಾಯಕರು ನನ್ನ ಬಗ್ಗೆ ಕೆಲ ಮಟ್ಟದ ಭಾಷೆಯನ್ನು ಬಳಸಿ ಮಾತನಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದ ರಾಘವೇಂದ್ರ, ಇದು ರಾಷ್ಟ್ರೀಯ ಪಕ್ಷದ ನಾಯಕರಿಗೆ ಶೋಭೆ ತರುವುದಿಲ್ಲ ಭಾಷೆ ಬಳಸುವುದು ನನಗೂ ಗೊತ್ತಿದೆ ಆದರೆ ನಮಗೆ ಸೌಜನ್ಯವಿದೆ ಇದನ್ನು ಕಾಂಗ್ರೆಸ್ ಪಕ್ಷದ ನಾಯಕರು ಅರ್ಥಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹಾಗೂ ಬಿಜೆಪಿಯ ಇತರ ಮುಖಂಡರುಗಳು ಉಪಸ್ಥಿತರಿದ್ದರು.